ಬಾಲ್ಯ ವಿವಾಹ ಜರುಗದಂತೆ ಸೂಕ್ತ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ

ತುಮಕೂರು: ಬಾಲ್ಯ ವಿವಾಹ ನಿಷೇಧ ಕಾಯ್ದೆ ಯೋಜನೆಯಡಿ ಜಿಲ್ಲೆಯ ಮುಜರಾಯಿ ದೇವಸ್ಥಾನ ಸೇರಿದಂತೆ ಯಾವುದೇ ಧಾರ್ಮಿಕ ಸ್ಥಳಗಳಲ್ಲಿ ಬಾಲ್ಯ ವಿವಾಹಗಳು ನಡೆಯದಂತೆ ಸೂಕ್ತ ಮುನ್ನೆಚ್ಚರಿಕೆವಹಿಸಿ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು ಎಂದು ಜಿಲ್ಲೆಯ ಎಲ್ಲಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಸೂಚಿಸಿದರು.

ತಮ್ಮ ಕಚೇರಿಯ ನ್ಯಾಯಾಲಯದ ಸಭಾಂಗಣದಲ್ಲಿಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ದೇವಸ್ಥಾನಗಳಲ್ಲಾಗಲೀ, ಚರ್ಚ್ ಸೇರಿದಂತೆ ಯಾವುದೇ ಧಾರ್ಮಿಕ ಸ್ಥಳಗಳಲ್ಲಿ ಬಾಲ್ಯ ವಿವಾಹ ನಡೆದರೇ ಸಂಬಂಧಿಸಿದ ಟ್ರಸ್ಟ್ ಅವರೇ ಜವಾಬ್ದಾರಿಯಾಗಿರುತ್ತಾರೆ. ಬಾಲ್ಯವಿವಾಹ ನಡೆಯುವ ಮಾಹಿತಿ ಸಿಕ್ಕಲ್ಲಿ ಸ್ಥಳೀಯ ಅಂಗನವಾಡಿ ಕಾರ್ಯಕರ್ತೆಯರು ಕೂಡಲೇ ಎಚ್ಚೆತ್ತು ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದು ಬಾಲ್ಯವಿವಾಹ ತಡೆಯಬೇಕು ಎಂದರಲ್ಲದೇ, ಗ್ರಾಮಪಂಚಾಯತಿಗಳಲ್ಲಿ ನಡೆಯುವ ಮಕ್ಕಳ ಗ್ರಾಮಸಭೆಯಲ್ಲೂ ಚರ್ಚೆಯಾಗಬೇಕು ಎಂದು ತಿಳಿಸಿದರು.

ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ಜಿಲ್ಲೆಯ ವಿವಿಧ ಸಾಂತ್ವನ ಕೇಂದ್ರಗಳಲ್ಲಿ ದಾಖಲಾಗುವ ಪ್ರಕರಣಗಳನ್ನು ನ್ಯಾಯಾಲಯದ ಹಂತದವರೆಗೆ ಹೋಗದೇ ಸಮಾಲೋಚನೆ ನಡೆಸುವುದರ ಮೂಲಕ ಪ್ರಕರಣಗಳನ್ನು ಇತ್ಯರ್ಥಗೊಳಿಸುವತ್ತ ಆದ್ಯತೆ ನೀಡಬೇಕು ಎಂದು ಸೂಚಿಸಿದರು.

ವರದಕ್ಷಿಣೆ ನಿಷೇಧ ಕಾಯ್ದೆಯಡಿ 2022-23ನೇ ಸಾಲಿನ ಸೆಪ್ಟೆಂಬರ್-೨೦೨೨ರ ಅಂತ್ಯಕ್ಕೆ ದಾಖಲಾದ ಪ್ರಕರಣಗಳ ಕುರಿತು ಮಾತನಾಡಿದ ಅವರು, ಈವರೆಗೆ 27 ಪ್ರಕರಣಗಳು ದಾಖಲಾಗಿದ್ದು, 6 ಪ್ರಕರಣಗಳು ವಿಲೇವಾರಿಯಾಗಿ 21 ಪ್ರಕರಣಗಳು ಬಾಕಿ ಇರುತ್ತವೆ. ವರದಕ್ಷಿಣೆ ನಿಷೇಧ ಕಾಯ್ದೆಯಡಿ ದಾಖಲಾಗುವ ಪ್ರಕರಣಗಳನ್ನು ಕೂಡಲೇ ಇತ್ಯರ್ಥಗೊಳಿಸಿ ಸಂತ್ರಸ್ತರಿಗೆ ನ್ಯಾಯ ದೊರಕಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ತಿಳಿಸಿದರು.

ಸಖಿ ಒನ್ ಸ್ಟಾಪ್ ಸೆಂಟರ್’ ಯೋಜನೆಯಡಿ ಅತ್ಯಾಚಾರ/ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಒಂದೇ ಸೂರಿನಡಿ ಸಮಾಲೋಚನೆ, ವೈದ್ಯಕೀಯ, ಕಾನೂನು ಸಲಹೆ, ಪೊಲೀಸ್ ನೆರವನ್ನು ಒದಗಿಸಲಾಗುತ್ತಿದೆ ಎಂದರು.

ಮಹಿಳಾ ಸ್ವೀಕಾರ ಕೇಂದ್ರದಡಿ ನಿರಾಶ್ರಿತ, ರಕ್ಷಣೆ ಕೋರಿ ಬರುವ, ತೊಂದರೆಗೀಡಾದ, ಸ್ವ ಇಚ್ಛೆಯಿಂದ ಬಂದ, ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರನ್ನು ದಾಖಲು ಮಾಡಿಕೊಂಡು ಮಹಿಳೆಯರಿಗೆ ಕೌಶಲ್ಯ ತರಬೇತಿ ನೀಡುವುದು ಮತ್ತು ಆಪ್ತ ಸಮಾಲೋಚನೆ ನಡೆಸುವ ಮೂಲಕ ಪುನರ್ವಸತಿ ಕಲ್ಪಿಸುವುದು ಸಂಸ್ಥೆಯ ಉದ್ದೇಶವಾಗಿದೆ ಎಂದು ತಿಳಿಸಿದರು.

ಸ್ವಾಧಾರ ಗೃಹ ಯೋಜನೆಯಡಿ ಸಂಕಷ್ಟದಲ್ಲಿರುವ ಮಹಿಳೆಯರು ಗೌರವಯುತವಾಗಿ ಜೀವನ ನಡೆಸಲು ಹಾಗೂ ಆರ್ಥಿಕ ಹಾಗೂ ಸಾಮಾಜಿಕ ಭದ್ರತೆಯಿಂದ ಇರಲು ಅನುಕೂಲವಾಗುವಂತೆ ಊಟ, ವಸತಿ, ಬಟ್ಟೆ, ವೈದ್ಯಕೀಯ ಚಿಕಿತ್ಸೆ, ಕಾನೂನು ಸಲಹೆ, ಆಪ್ತ ಸಮಾಲೋಚನೆಯನ್ನು ಒದಗಿಸಲು ಹಾಗೂ ಪುನರ್ವಸತಿಗೊಳಿಸಲು ಪ್ರತಿ ಜಿಲ್ಲೆಯಲ್ಲಿಯೂ ಸ್ವಾಧಾರ ಗೃಹ ಯೋಜನೆಯನ್ನು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.

ಪೌಷ್ಟಿಕ ಆಹಾರ ಕಾರ್ಯಕ್ರಮದಡಿ ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಆರೋಗ್ಯ ತಪಾಸಣೆ ನಡೆಸಿ ಹಾಲು, ಮೊಟ್ಟೆ, ಬಹುಮಿಶ್ರಿತ ಬಹುಧಾನ್ಯ ನ್ಯೂಟ್ರಿಮಿಕ್ಸ್‌ಗಳನ್ನು ನೀಡಿ ಮಕ್ಕಳನ್ನು ಆರೋಗ್ಯವಂತರನ್ನಾಗಿಸಬೇಕು. ಈ ನಿಟ್ಟಿನಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ನ್ಯಾಯಾಧೀಶರಾದ ನೂರುನ್ನೀಸ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕೆ ವಿದ್ಯಾಕುಮಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಂ. ಎಸ್. ಶ್ರೀಧರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪವಿತ್ರಾ, ಸೇರಿದಂತೆ ಜಿಲ್ಲೆಯ ಎಲ್ಲಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಜರಿದ್ದರು.

ಟಿ ಎಸ್ ಕೃಷ್ಣಮೂರ್ತಿ

ಸಂಪಾದಕ ತುಮಕೂರು 9743340694

You May Also Like

error: Content is protected !!