ತುಮಕೂರು: ತುಮಕೂರಿನಲ್ಲಿ ತಡರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಸುವರ್ಣಮುಖಿ, ಜಯಮಂಗಲಿ ಮತ್ತು ಗರುಡಾಚಲ ನದಿ ಉಕ್ಕಿ ಹರಿಯುತ್ತಿದ್ದು ಕೊರಟಗೆರೆ ಕ್ಷೇತ್ರದಲ್ಲಿ ಹೈಅಲಟ್೯ ಘೋಷಣೆ ಮಾಡಲಾಗಿದೆ. ಕೊರಟಗೆರೆ ಕ್ಷೇತ್ರದ ಈ 3ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಕೊರಟಗೆರೆ ವಿಧಾನಸಭಾ ಕ್ಷೇತ್ರದ 150ಕ್ಕೂ ಅಧಿಕ ಗ್ರಾಮಗಳಿಗೆ ಜಲದಿಗ್ಭಂಧನ ಹಾಕಲಾಗಿದೆ. ಮುಂಜಾಗೃತಾ ಕ್ರಮವಾಗಿ ಜನರಿಗೆ ನದಿ ತಟಗಳಿಗೆ ತೆರಳದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ನದಿ ತೀರದಲ್ಲಿ ವಾಸಿಸುವ ಜನರು ಮುಂಜಾಗೃತೆಯಿಂದ ಇರುವಂತೆ ಸೂಚಿಸಲಾಗಿದ್ದು, ಮುನ್ನೆಚ್ಚರಿಕಾ ಕ್ರಮವನ್ನು ತೆಗೆದುಕೊಳ್ಳಲಾಗಿದೆ.
ನದಿ ತಟದಲ್ಲಿರುವ 150ಕ್ಕೂ ಅಧಿಕ ಗ್ರಾಮಗಳಿಗೆ ಎಚ್ಚರಿಕೆಯನ್ನು ಜಿಲ್ಲಾಡಳಿತ ನೀಡಿದೆ. ಜೊತೆಗೆ ಸಾಧ್ಯವಾದರೆ ಸ್ಥಳವನ್ನು ತೊರೆಯುವಂತೆಗೂ ಸೂಚನೆ ನೀಡಿದೆ. ಮಳೆರಾಯನ ಆರ್ಭಟದಿಂದ ಸುವರ್ಣಮುಖಿ, ಜಯಮಂಗಲಿ ಮತ್ತು ಗರುಡಾಚಲ ನದಿಪಾತ್ರದ ಸೇತುವೆಗಳು ಸಂಪೂರ್ಣ ಜಲಾವೃತವಾಗಿದೆ.
ಕೊರಟಗೆರೆ ಕ್ಷೇತ್ರದ ಪಟ್ಟಣ ಮತ್ತು ಗ್ರಾಮೀಣ ಪ್ರದೇಶದ ಬಹುತೇಕ ಮಣ್ಣಿನ ಮನೆಗಳು ಕುಸಿದಿವೆ. ರೈತಾಪಿವರ್ಗ ಬಿತ್ತನೆ ಮಾಡಿದ್ದ ಬೆಳೆಗಳು ನೀರಿನಲ್ಲಿ ಮುಳುಗಿ ರೈತರಿಗೆ ಕೋಟ್ಯಾಂತರ ರೂ ನಷ್ಟವಾಗಿದೆ.ಕೊರಟಗೆರೆ ಕ್ಷೇತ್ರದಲ್ಲಿ ಹುಟ್ಟಿ ಹರಿಯುವ ಸುವರ್ಣಮುಖಿ, ಜಯಮಂಗಲಿ ಮತ್ತು ಗರುಡಾಚಲ ನದಿಪಾತ್ರದ 175ಕ್ಕೂ ಅಧಿಕ ಕೆರೆ-ಕಟ್ಟೆಗಳು ಭರ್ತಿಯಾಗಿವೆ.
ಗ್ರಾಮೀಣ ಪ್ರದೇಶದ ತೋಟದ ಮನೆಗಳಲ್ಲಿ ವಾಸಿಸುತ್ತಿರುವ ರೈತರಿಗೆ ಈಗಾಗಲೇ ಸಂಕಷ್ಟ ಎದುರಾಗಿದೆ. ಮತ್ತೆ ಮಳೆಯಾದರೇ ಅನಾಹುತ ಎದುರಾಗುವ ಸಾಧ್ಯತೆಯೇ ಹೆಚ್ಚಾಗಿದೆ. ರೈತಾಪಿವರ್ಗ ತೋಟದ ಮನೆಗಳನ್ನು ತೊರೆದು ಗ್ರಾಮಗಳಿಗೆ ಆಗಮಿಸುವಂತೆ ಈಗಾಗಲೇ ಕಂದಾಯ, ಪೊಲೀಸ್ ಇಲಾಖೆ ಮತ್ತು ಗ್ರಾಪಂ ಅಧಿಕಾರಿ ವರ್ಗ ಮನವಿ ಮಾಡಿದೆ.
ಮಳೆರಾಯನ ಆರ್ಭಟದಿಂದ ಸಂಕಷ್ಟ ಎದುರಾಗಿರುವ ಪ್ರದೇಶಗಳಲ್ಲಿ ಈಗಾಗಲೇ ಕಂದಾಯ, ಪೊಲೀಸ್ ಮತ್ತು ಸ್ಥಳೀಯ ಗ್ರಾಪಂ ಆಡಳಿತ ಮೊಕ್ಕಾಂ ಹೊಡಿದೆ. ನೂರಾರು ವಿದ್ಯುತ್ ಕಂಬಗಳು ಧರೆಗೆ ಉರುಳಿರುವ ಪರಿಣಾಮ ರೈತರು ಮತ್ತೆ ಕತ್ತಲೆಯಲ್ಲಿಯೇ ಕಾಲ ಕಳೆಯುವ ಪರಿಸ್ಥಿತಿಯು ನಿರ್ಮಾಣವಾಗಿದೆ. ಸಮಸ್ಯೆ ತೀರ್ವ ಆಗಿರುವ ಪರಿಣಾಮ ಬೆಸ್ಕಾಂ ಇಲಾಖೆಯು ಸಹ ಹಗಲು ರಾತ್ರಿ ಕಾರ್ಯಚರಣೆ ನಡೆಯುತ್ತಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ತುಮಕೂರು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ರೈತರಿಗೆ ಪರಿಹಾರದ ಭರವಸೆ ನೀಡಿದ್ದಾರೆ. ತಹಶೀಲ್ದಾರ್ ನಾಹೀದಾ ಅವರು ಕೂಡ ರೈತರ ಮನೆಗಳಿಗೆ ಭೇಟಿ ನೀಡಿ, ಪರಿಸ್ಥಿತಿ ಅವಲೋಕಿಸಿದ್ದು, ಅಪಾಯಕಾರಿ ಸ್ಥಳದಲ್ಲಿರುವವರ ಸ್ಥಳಾಂತರಕ್ಕೆ ಕ್ರಮವಹಿಸಿದ್ದಾರೆ